ಅಧ್ಯಾಯ ಐದು
ನಾಲ್ಕನೆ
ಅಧ್ಯಾಯದಲ್ಲಿ ಕೃಷ್ಣ ಕರ್ಮಯೋಗದ ಬಗ್ಗೆ ಹೇಳಿದ ಹಾಗು ಕೊನೆಯಲ್ಲಿ ಕರ್ಮಸನ್ಯಾಸದ ಬಗ್ಗೆಯೂ
ಹೇಳಿದ. ಇಲ್ಲಿ ನಮಗೆ ಸ್ವಲ್ಪ ಗೊಂದಲವಾಗುತ್ತದೆ. ಇದನ್ನು ಸಂಪೂರ್ಣ ಅರ್ಥ ಮಾಡಿಕೊಳ್ಳಬೇಕಾದರೆ
ಮೊದಲು ಕರ್ಮಯೋಗ ಮತ್ತು ಕರ್ಮಸಂನ್ಯಾಸ ಅಂದರೆ ಏನು ಎಂದು ತಿಳಿಯಬೇಕು. ಮೇಲ್ನೋಟಕ್ಕೆ ನಮಗೆ ಕರ್ಮಸಂನ್ಯಾಸ ಅಂದರೆ 'ಕರ್ಮತ್ಯಾಗ' ಎನ್ನುವಂತೆ ಕಾಣುತ್ತದೆ. ಆದರೆ ಕೃಷ್ಣ ನಾಲ್ಕನೇ ಅಧ್ಯಾಯದ
ಕೊನೆಯಲ್ಲಿ "ಎದ್ದು ನಿಲ್ಲು- ಯುದ್ಧ ಮಾಡು" ಎಂದು ಅರ್ಜುನನನ್ನು ಕರ್ಮ ಮಾಡುವಂತೆ ಹುರಿದುಂಬಿಸಿದ್ದನ್ನು
ನಾವು ಕಂಡಿದ್ದೇವೆ. ಇದರಿಂದ ಕರ್ಮಸಂನ್ಯಾಸ
ಅಂದರೆ ಕರ್ಮತ್ಯಾಗವಲ್ಲ ಎನ್ನುವುದು ನಮಗೆ ಸ್ಪಷ್ಟವಾಗುತ್ತದೆ. ಶಾಸ್ತ್ರೀಯವಾಗಿ ಕರ್ಮಸಂನ್ಯಾಸ
ಎಂದರೆ ದ್ವಂದ್ವಾತೀತವಾಗಿ, ಕರ್ಮಫಲದ ಬಯಕೆಯಿಲ್ಲದೆ-ಕರ್ಮ ಮಾಡುವುದು. ಇಲ್ಲಿ ರಾಗ-ದ್ವೇಷಗಳಿಗೆ, ಕಾಮ-ಕ್ರೋಧಗಳಿಗೆ
ಎಡೆಯಿಲ್ಲ. ಈ ಬಗ್ಗೆಯೂ ವಿಶೇಷವಾಗಿ ಕೃಷ್ಣ ಹಿಂದೆ ವಿವರಿಸಿದ್ದ. ಆದ್ದರಿಂದ ಕರ್ಮಸಂನ್ಯಾಸ ಎಂದರೆ ಕರ್ಮವನ್ನು ಬಿಡುವುದಲ್ಲ, ಕರ್ಮದಲ್ಲಿ ಕಾಮ ಕ್ರೋಧಗಳನ್ನು ಬಿಡುವುದು. "ಕಾಮಕ್ರೋಧಗಳ ಅತೀತನಾಗಿ ಯುದ್ಧಮಾಡು ಮತ್ತು ಜ್ಞಾನಯೋಗದ ದಾರಿಯಲ್ಲಿ
ನಡೆ" ಎನ್ನುವುದು ಅರ್ಜುನನಿಗೆ ಕೃಷ್ಣನ ಸಂದೇಶ. ಆದರೆ ಕಾಮ-ಕ್ರೋಧಗಳ ಅತೀತನಾಗಿ ಜ್ಞಾನಮಾರ್ಗದಲ್ಲಿ
ಯುದ್ಧ ಮಾಡುವುದು ಹೇಗೆ? ಇದನ್ನು ಅರ್ಥ ಮಾಡಿಕೊಳ್ಳುವುದು ನಮಗೆ ಸ್ವಲ್ಪ ಕಷ್ಟ. ಈ ಕುರಿತು ಅರ್ಜುನ ಕೃಷ್ಣನಲ್ಲಿ ವಿವರಣೆಯನ್ನು ನಮ್ಮ
ನಿಮ್ಮೆಲ್ಲರ ಪರವಾಗಿ ಕೇಳುವುದರೊಂದಿಗೆ ಐದನೇ ಅಧ್ಯಾಯ ಆರಂಭವಾಗುತ್ತದೆ. ಈ ಅಧ್ಯಾಯದಲ್ಲಿ
ಕರ್ಮಸಂನ್ಯಾಸದ ಬಗ್ಗೆ ವಿಶೇಷವಾದ ವಿವರಣೆಯನ್ನು ಕೃಷ್ಣ ನಮ್ಮ ಮುಂದಿಟ್ಟಿದ್ದಾನೆ.
ಅರ್ಜುನ ಉವಾಚ ।
ಸಂನ್ಯಾಸಂ ಕರ್ಮಣಾಂ ಕೃಷ್ಣ ಪುನರ್ಯೋಗಂ ಚ ಶಂಸಸಿ ।
ಯಚ್ಛ್ರೇಯ ಏತಯೋರೇಕಂ ತನ್ಮೇ ಬ್ರೂಹಿ ಸುನಿಶ್ಚಿತಮ್ ॥೧॥
ಅರ್ಜುನಃ ಉವಾಚ-ಅರ್ಜುನ ಕೇಳಿದನು:
ಸಂನ್ಯಾಸಂ
ಕರ್ಮಣಾಮ್ ಕೃಷ್ಣ ಪುನಃ ಯೋಗಮ್ ಚ ಶಂಸಸಿ ।
ಯತ್ ಶ್ರೇಯಃ
ಏತಯೋಃ ಏಕಮ್ ತತ್ ಮೇ ಬ್ರೂಹಿ ಸುನಿಶ್ಚಿತಮ್ -- ಕೃಷ್ಣ, ಒಮ್ಮೆ ಕರ್ಮಸಂನ್ಯಾಸವನ್ನು
ಹೊಗಳುತ್ತಿ; ಮತ್ತೊಮ್ಮೆ ಕರ್ಮಯೋಗವನ್ನು. ಇವೆರಡರಲ್ಲಿ ಯಾವುದು ಮಿಗಿಲು
ಅದನ್ನು ನನಗೆ ಖಚಿತವಾಗಿ ಹೇಳು.
ಅರ್ಜುನ ಕೇಳುತ್ತಾನೆ: "ಓ ಕೃಷ್ಣ, ನೀನು ಒಮ್ಮೆ ಹೋರಾಡು ಎನ್ನುತ್ತಿ, ಇನ್ನೊಮ್ಮೆ ಕರ್ಮಸಂನ್ಯಾಸ ಮಾಡು ಅನ್ನುತ್ತಿ . ಒಂದು ವೇಳೆ ಕರ್ಮಸಂನ್ಯಾಸ ಅಂದರೆ
ಕರ್ಮತ್ಯಾಗವಾದರೆ ಇದು ಒಂದಕ್ಕೊಂದು ವಿರುದ್ಧ. ಇದರಲ್ಲಿ ಯಾವುದು
ಶ್ರೇಯಸ್ಕರ ಎನ್ನುವುದನ್ನು ನಿಶ್ಚಿತವಾಗಿ ಹೇಳು" ಎಂದು ಅರ್ಜುನ ಕೃಷ್ಣನನ್ನು ಕೇಳುತ್ತಾನೆ. ಯುದ್ಧ ಮಾಡುವಾಗ ದ್ವಂದ್ವ ಅನ್ನುವುದು ಇದ್ದೇ ಇದೆ. ದ್ವಂದ್ವತ್ಯಾಗದಿಂದ ಯುದ್ಧ ಮಾಡುವುದು ಹೇಗೆ? ಕರ್ಮಸಂನ್ಯಾಸ ಮತ್ತು ಕರ್ಮಯೋಗ ಇವೆರಡೂ ಒಟ್ಟಿಗೆ ಹೇಗೆ ಸಾಧ್ಯ? ಯುದ್ಧವೆಂದಮೇಲೆ ರಾಗ-ದ್ವೇಷ ಇದ್ದೇ ಇರುತ್ತದೆ. ಈ ಕಾರಣದಿಂದ ಕೃಷ್ಣನ ಮಾತು ನಮಗೆ
ಖಚಿತವಾಗಿ ಅರ್ಥವಾಗುವುದಿಲ್ಲ. ಅದಕ್ಕಾಗಿ ಅರ್ಜುನ ಕೃಷ್ಣನಲ್ಲಿ ವಿವರವನ್ನು ಕೇಳುತ್ತಿದ್ದಾನೆ.
ಇಲ್ಲಿ ಅರ್ಜುನ
ತನ್ನ ಪ್ರಶ್ನೆಯ ನಡುವೆ "ಕೃಷ್ಣ" ಎನ್ನುವ ಸಂಬೋಧನೆಯನ್ನು ಬಳಸಿದ್ದಾನೆ. 'ಕರ್ಷತಿ ಇತೀ ಕೃಷ್ಣಃ' ಎಲ್ಲರನ್ನೂ
ತನ್ನೆಡೆಗೆ ಸೆಳೆಯುವ ಪಾದರಸ, ಸಂಸಾರದಿಂದ ಎತ್ತರಕ್ಕೆ ಕೊಂಡೊಯ್ಯುವ ಕರ್ಷಣಶಕ್ತಿಯಾದ ಸೌಂದರ್ಯಮೂರ್ತಿ ಭಗವಂತ ಕೃಷ್ಣಃ. ಅಜ್ಞಾನದಿಂದ ಬರುವ ಸಂಶಯವನ್ನು ಕರ್ಷಣೆಮಾಡಿ
ಜ್ಞಾನದ ಮಡಿಲಿಗೆ ಸೆಳೆಯುವ ನೀನು ನನಗೆ ಖಚಿತವಾಗಿ ಯಾವುದು ಶ್ರೇಯಸ್ಸು ಎನ್ನುವುದನ್ನು ತಿಳಿಸು
ಎನ್ನುವ ಭಾವ ಈ ಸಂಬೋಧನೆಯಲ್ಲಿದೆ.
ಭಗವಾನುವಾಚ ।
ಸಂನ್ಯಾಸಃ ಕರ್ಮಯೋಗಶ್ಚ ನಿಃಶ್ರೇಯಸಕರಾವುಭೌ ।
ತಯೋಸ್ತು ಕರ್ಮಸಂನ್ಯಾಸಾತ್ ಕರ್ಮಯೋಗೋ
ವಿಶಿಷ್ಯತೇ ॥೨॥
ಭಗವಾನುವಾಚ- ಭಗವಂತ
ಹೇಳಿದನು
ಸಂನ್ಯಾಸಃ
ಕರ್ಮಯೋಗಃ ಚ ನಿಃಶ್ರೇಯಸ ಕರೌ ಉಭೌ ।
ತಯೋಃ ತು ಕರ್ಮ
ಸಂನ್ಯಾಸಾತ್ ಕರ್ಮಯೋಗಃ ವಿಶಿಷ್ಯತೇ -- ಕರ್ಮಸಂನ್ಯಾಸ ಮತ್ತು ಕರ್ಮಯೋಗ ಎರಡೂ
ಒಳಿತಿನ ದಾರಿಗಳೆ. ಅವುಗಳಲ್ಲಿ ಕರ್ಮಸಂನ್ಯಾಸಕ್ಕಿಂತ ಕರ್ಮಯೋಗ ಮಿಗಿಲು.
ಜ್ಞೇಯಃ ಸ ನಿತ್ಯಸಂನ್ಯಾಸೀ ಯೋ ನ ದ್ವೇಷ್ಟಿ ನ ಕಾಂಕ್ಷತಿ ।
ನಿರ್ದ್ವಂದ್ವೋ ಹಿ ಮಹಾಬಾಹೋ ಸುಖಂ ಬಂಧಾತ್
ಪ್ರಮುಚ್ಯತೇ ॥೩॥
ಜ್ಞೇಯಃ ಸ ನಿತ್ಯಸಂನ್ಯಾಸೀ
ಯಃ ನ ದ್ವೇಷ್ಟಿ ನ ಕಾಂಕ್ಷತಿ ।
ನಿರ್ದ್ವಂದ್ವಃ ಹಿ
ಮಹಾಬಾಹೋ ಸುಖಮ್ ಬಂಧಾತ್ ಪ್ರಮುಚ್ಯತೇ --ದ್ವೇಷಿಸದವನು, ಮತ್ತು ಬಯಸದವನು ನಿಜವಾದ ಸಂನ್ಯಾಸಿಯೆಂದರಿಯಬೇಕು. ಮಹಾವೀರ, ಇಂಥ ದ್ವಂದ್ವಗಳನ್ನು ಗೆದ್ದವನು ಹಾಯಾಗಿ ಕರ್ಮ ಸೆರೆಯಿಂದ ಪಾರಾಗುತ್ತಾನೆ.
ಇಲ್ಲಿ ಅರ್ಜುನನ
ಪ್ರಶ್ನೆಗೆ ಕೃಷ್ಣನ ಉತ್ತರ ಒಗಟಿನ ರೂಪದಲ್ಲಿದೆ. ಈ ಶ್ಲೋಕವನ್ನು ಎಚ್ಚರಿಕೆಯಿಂದ ಬಿಡಿಸಿ
ಅರ್ಥೈಸಿಕೊಳ್ಳಬೇಕು. ಇಲ್ಲಿ ಹೇಳುವ ಸಂನ್ಯಾಸ
ಸಂನ್ಯಾಸಾಶ್ರಮವಲ್ಲ. ಯಾರು ರಾಗ ದ್ವೇಷವನ್ನು ದಾಟಿ ನಿಲ್ಲುತ್ತಾನೋ ಅವನು ಸಂನ್ಯಾಸಿ. ಸ+ಅಹಂ+ನ್ಯಾಸ-ಸಂನ್ಯಾಸ. 'ಸ' ಅಂದರೆ ಸಂಪೂರ್ಣವಾದ, ಸಮೀಚೀನವಾದ, ದೋಷರಹಿತ ಮತ್ತು ಗುಣಪೂರ್ಣನಾದ ಭಗವಂತ. ಅವನಲ್ಲಿ ನಮ್ಮ ಅಹಂ(ರಾಗ ದ್ವೇಷ-ಅಹಂಕಾರ)ನ್ನು
ನ್ಯಾಸ ಮಾಡುವುದು ಸಂನ್ಯಾಸ. ಕೃಷ್ಣ ಹೇಳುತ್ತಾನೆ: "ಕರ್ಮಯೋಗ ಕರ್ಮಸಂನ್ಯಾಸಕ್ಕಿಂತ ಮಿಗಿಲು" ಎಂದು. ಏಕೆಂದರೆ
ಇಲ್ಲಿ ಅರ್ಜುನ 'ನನಗೆ ಕೌರವರ ಮೇಲೆ ದ್ವೇಷವಿಲ್ಲ, ನಾವೇ ಗೆಲ್ಲಬೇಕು ಎನ್ನುವ ಬಯಕೆ ಇಲ್ಲ,
ನನಗೆ ಯಾವ ಫಲದ ಆಸೆಯೂ ಇಲ್ಲ' ಎಂದು
ಯುದ್ಧ ಮಾಡದೇ ನಿರ್ಲಿಪ್ತನಾಗಿ-ನಿಷ್ಕ್ರೀಯನಾಗಿ ಕುಳಿತರೆ ಅದು ಕರ್ಮಸಂನ್ಯಾಸವಾಗುತ್ತದೆ. ಆದರೆ
ಹೀಗೆ ಸುಮ್ಮನೆ ಕುಳಿತರೆ ಕರ್ತವ್ಯಕರ್ಮ(ಕರ್ಮಯೋಗ) ಮಾಡಿದಂತಾಗುವುದಿಲ್ಲ . ಇದರಿಂದಾಗಿ ಅಧರ್ಮಕ್ಕೆ
ಜಯವಾಗುತ್ತದೆ. ಆದ್ದರಿಂದ ಕರ್ಮಸಂನ್ಯಾಸ ಮತ್ತು ಕರ್ಮಯೋಗ ಜೊತೆ-ಜೊತೆಯಾಗಿರಬೇಕು. ಕರ್ಮಯೋಗವಿಲ್ಲದ ಕರ್ಮಸಂನ್ಯಾಸ ಎಂದೂ ಶ್ರೇಯಸ್ಸನ್ನು ತರುವುದಿಲ್ಲ ಎನ್ನುವುದು ಕೃಷ್ಣನ ಉತ್ತರ.
ಸಂನ್ಯಾಸ ಅನ್ನುವುದು ಅರ್ಥಪೂರ್ಣವಾಗಬೇಕಾದರೆ ಕಾಮ ಕ್ರೋಧಗಳ
ತ್ಯಾಗದ ಜೊತೆಗೆ ಕ್ರಿಯೆ ಇರಬೇಕು. ಹೋರಾಡಬೇಕು-ಆದರೆ ರಾಗದ್ವೇಷದಿಂದಲ್ಲ. ಕ್ರಿಯೆ ಇಲ್ಲದೆ ರಾಗ-ದ್ವೇಷ ತ್ಯಾಗಕ್ಕೆ ಅರ್ಥವಿಲ್ಲ. ಆದ್ದರಿಂದ
ದ್ವಂದ್ವಾತೀತವಾಗಿ ಕರ್ಮ ಮಾಡಬೇಕು ಎನ್ನುವುದು ಕೃಷ್ಣನ ಸಂದೇಶ.
ನಮ್ಮ ಜೀವನವೇ ಒಂದು
ಹೋರಾಟ. ಇಲ್ಲಿ ನಮ್ಮ ಕರ್ತವ್ಯಕರ್ಮದಿಂದ ದೂರ ಸರಿದು,
ರಾಗ-ದ್ವೇಷ, ಕಾಮ-ಕ್ರೋಧವನ್ನು
ಬಿಟ್ಟು, ನಿಷ್ಕ್ರೀಯನಾಗಿ, ‘ಕರ್ಮಸಂನ್ಯಾಸವನ್ನು
ಸಾಧಿಸಿದೆ’ ಎಂದುಕೊಂಡರೆ ನಮ್ಮ ಜೀವನ ವ್ಯರ್ಥ. ಅದರಿಂದ ಎಂದೂ ಶ್ರೇಯಸ್ಸಿಲ್ಲ ಮತ್ತು ಮೋಕ್ಷವಿಲ್ಲ. ರಾಗ-ದ್ವೇಷ ತ್ಯಾಗದ ಜೊತೆಗೆ, ಬದುಕು
ಎನ್ನುವ ಜೀವನ ಸಂಗ್ರಾಮದಲ್ಲಿ ನಮ್ಮ ಕರ್ತವ್ಯಕರ್ಮದ
ಮುಖೇನ ಹೋರಾಟ ಮಾಡುವುದೇ ನಿಜವಾದ ಜೀವನಧರ್ಮ. ಈ
ರೀತಿ ದ್ವಂದ್ವಾತೀತ ಬದುಕನ್ನು ಬಾಳುವವನು ಕರ್ಮದ
ಸೆರೆಯಿಂದ ಪಾರಾಗುತ್ತಾನೆ.
ಇಲ್ಲಿ ಕೃಷ್ಣ ಅರ್ಜುನನ್ನು ಮಹಾಬಾಹು ಎಂದು ಸಂಬೋಧಿಸಿದ್ದಾನೆ. ಹಿಂದೆ ಹೇಳಿದಂತೆ ಮಹಾಬಾಹು ಎಂದರೆ ಮಹಾವೀರ ಎನ್ನುವುದು ಮೇಲ್ನೋಟದ ಅರ್ಥ.ಇಲ್ಲಿ ಈ
ವಿಶೇಷಣಕ್ಕೆ ವಿಶೇಷ ಅರ್ಥವಿದೆ. 'ಮಹಾಬಾ' ಅಂದರೆ ರಾಗ-ದ್ವೇಷ, ಮತ್ತು ಕಾಮನೆಗಳ ಮಡುವಿನಲ್ಲಿರುವವ. ಇಂತಹ ಮಹತ್ತರವಾದ ರಾಗ-ದ್ವೇಷಗಳನ್ನು ತ್ಯಾಗ ಮಾಡಿದವ
ಮಹಾಬಾಹು. "ನಿನ್ನಲ್ಲಿ ಕರ್ಮಸಂನ್ಯಾಸವಿದೆ, ಅದರ ಜೊತೆಗೆ ಕರ್ಮಯೋಗ ಮಾಡಲು ಅರ್ಹತೆಯುಳ್ಳ ಮಹಾವೀರ ನೀನು" ಎನ್ನುವ ಧ್ವನಿ ಈ ಸಂಬೋಧನೆಯಲ್ಲಿದೆ. ನಮ್ಮ ಜೀವನ ಸಂಗ್ರಾಮದಲ್ಲಿ ರಾಗ-ದ್ವೇಷಗಳನ್ನು ಬಿಟ್ಟು
ಕರ್ಮ ಮಾಡಬೇಕು. ಕರ್ಮಸಂನ್ಯಾಸ ಮತ್ತು ಕರ್ಮಯೋಗ ಎರಡೂ ಒಟ್ಟಿಗಿರಬೇಕು ಎನ್ನುವುದು ಮೂಲ ಸಂದೇಶ. ಅದಕ್ಕೆ ಹೊಂದಿಕೆಯಾಗುವಂತೆ ಇಲ್ಲಿ 'ಮಹಾಬಾಹು' ಎನ್ನುವ ವಿಶೇಷಣ ಬಳಕೆಯಾಗಿದೆ.
No comments:
Post a Comment