ಯತ್ರೋಪರಮತೇ ಚಿತ್ತಂ ನಿರುದ್ಧಂ ಯೋಗಸೇವಯಾ ।
ಯತ್ರ ಚೈವಾSತ್ಮನಾSSತ್ಮಾನಂ ಪಶ್ಯನ್ನಾತ್ಮನಿ ತುಷ್ಯತಿ ॥೨೦॥
ಯತ್ರ ಉಪರಮತೇ
ಚಿತ್ತಮ್ ನಿರುದ್ಧಮ್ ಯೋಗ ಸೇವಯಾ।
ಯತ್ರ ಚ ಏವ ಆತ್ಮನಾ
ಆತ್ಮಾನಮ್ ಪಶ್ಯನ್ ಆತ್ಮನಿ ತುಷ್ಯತಿ ||
ಸುಖಮ್ಮಾತ್ಯಂತಿಕಂ ಯತ್ತದ್ ಬುದ್ಧಿ ಗ್ರಾಹ್ಯಮತೀಂದ್ರಿಯಮ್ ।
ವೇತ್ತಿ ಯತ್ರ ನ ಚೈವಾಯಂ ಸ್ಥಿತಶ್ಚಲತಿ ತತ್ತ್ವತಃ ॥೨೧॥
ಸುಖಮ್
ಆತ್ಯನ್ತಿಕಮ್ ಯತ್ ತತ್ ಬುದ್ಧಿ ಗ್ರಾಹ್ಯಮ್ ಅತೀಂದ್ರಿಯಮ್ ।
ವೇತ್ತಿ ಯತ್ರ ನ ಚ
ಏವ ಅಯಮ್ ಸ್ಥಿತಃ ಚಲತಿ
ತತ್ತ್ವತಃ ||
ಯಂ ಲಬ್ಧ್ವಾ ಚಾಪರಂ ಲಾಭಂ ಮನ್ಯತೇ ನಾಧಿಕಂ ತತಃ ।
ಯಸ್ಮಿನ್ ಸ್ಥಿತೋ ನ ದುಃಖೇನ ಗುರುಣಾSಪಿ ವಿಚಾಲ್ಯತೇ ॥೨೨॥
ಯಮ್ ಲಬ್ಧ್ವಾ ಚ ಅಪರಮ್ ಲಾಭಮ್
ಮನ್ಯತೇ ನ ಅಧಿಕಮ್ ತತಃ ।
ಯಸ್ಮಿನ್ ಸ್ಥಿತಃ ನ
ದುಃಖೇನ ಗುರುಣಾ ಅಪಿ ವಿಚಾಲ್ಯತೇ ||
ತಂ ವಿದ್ಯಾದ್ ದುಃಖಸಂಯೋಗವಿಯೋಗಂ ಯೋಗಸಂಜ್ಞಿತಮ್ ।
ಸ ನಿಶ್ಚಯೇನ ಯೋಕ್ತವ್ಯೋ ಯೋಗೋನಿರ್ವಿಣ್ಣಚೇತಸಾ ॥೨೩॥
ತಮ್ ವಿದ್ಯಾತ್ ದುಃಖಸಂಯೋಗ ವಿಯೋಗಮ್ ಯೋಗಸಂಜ್ಞಿತಮ್ ।
ಸಃ ನಿಶ್ಚಯೇನ
ಯೋಕ್ತವ್ಯಃ ಯೋಗಃ ಅನಿರ್ವಿಣ್ಣಚೇತಸಾ ||
ಧ್ಯಾನ ಸಾಧನೆಯಿಂದ
ಬಿಗಿಗೊಂಡ ಒಳಬಗೆ ಈ ಸ್ಥಿತಿಯಲ್ಲಿ ಹೊರಗಣ ವಿಷಯಗಳತ್ತ ಹರಿಯದು. ಇಲ್ಲಿ ತನ್ನೊಳಗೆಯೆ
ಬಗೆಯಿಂದ[ಭಗವಂತನ ಹಸಾದದಿಂದ] ಭಗವಂತನನ್ನು ಕಾಣುತ್ತ ಸಂತಸಗೊಳ್ಳುತ್ತಾನೆ.ಇಲ್ಲಿ ಇಂದ್ರಿಯಗಳಿಂದ
ದೊರಕದ, ಒಳಬಗೆಯಲ್ಲಿ ಅರಳುವ ಅತಿಶಯವಾದ ಆನಂದವನ್ನು ಅನುಭವಿಸುತ್ತಾನೆ.
ಈ ಸ್ಥಿತಿಯಲ್ಲಿ ನಿಂತವನು ಎಂದೂ ಭಗವಂತನಿಂದ ಕದಲುವುದಿಲ್ಲ. ಇದನ್ನು ಪಡೆದ ಮೇಲೆ ಇನ್ನಾವ
ಗಳಿಕೆಯೂ ಇದಕ್ಕಿಂತ ಮಿಗಿಲೆನಿಸುವುದಿಲ್ಲ. ಇಲ್ಲಿ ನಿಂತವನು ಎಂಥ ಹಿರಿಯ ದುಗುಡದಿಂದಲೂ ಕಂಗೆಡುವುದಿಲ್ಲ.
ಇದೇ ಎಲ್ಲ ದುಗುಡಗಳಿಂದ ಬಿಡುಗಡೆಗೊಳಿಸುವ ಯೋಗವೆಂದರಿಯಬೇಕು. ವಿಷಯಗಳಿಂದ ಬೇಸತ್ತು ಬೆನ್ನು
ತಿರುಗಿಸಿದವನು ಅವಶ್ಯವಾಗಿ ಈ ಯೋಗದಲ್ಲಿ ಪಳಗಬೇಕು.
ಹೊರಗಿನ ಪ್ರಪಂಚದ
ಸಂಪರ್ಕವನ್ನು ಕಳೆದುಕೊಂಡು ಮನಸ್ಸು ಭಗವಂತನಲ್ಲಿ ನೆಲೆಸಿದಾಗ ಏನಾಗುತ್ತದೆ ಎಂದರೆ- ಕೃಷ್ಣ
ಹೇಳುತ್ತಾನೆ: “ಉಪರಮತೇ ಚಿತ್ತಮ್” ಅಂದರೆ ಉತ್ಕೃಷ್ಟವಾದ ಆ ಆನಂದದಲ್ಲೇ ಮನಸ್ಸು
ನಿಂತುಬಿಡುತ್ತದೆ. ಆ ಆನಂದದ ಸೆಲೆಯಿಂದ ಬೇರೆಯಾಗುವುದು ಬೇಡ ಎನ್ನುವ ಭಾವನೆ
ಬಂದುಬಿಡುತ್ತದೆ. ಸಾಮಾನ್ಯವಾಗಿ ತಕ್ಷಣ ಈ ಸ್ಥಿತಿಗೆ ಮನಸ್ಸು ಹೋಗುವುದಿಲ್ಲ. ಅದಕ್ಕೆ ಬಹಳ
ಪ್ರಯತ್ನ ಬೇಕು. ಪ್ರಯತ್ನ ಒಂದು ಜನ್ಮದಲ್ಲ ಅನೇಕ ಜನ್ಮದ ಪ್ರಯತ್ನವಿಲ್ಲದೆ ಒಮ್ಮೆಗೆ ಈ ಸ್ಥಿತಿಯನ್ನು
ತಲುಪುವುದು ಅಸಾಧ್ಯ. ನಿರಂತರ ಯೋಗಾಭ್ಯಾಸದ ಸಾಧನೆಯಿಂದ ಚಿತ್ತ ವೃತ್ತಿಯನ್ನು ನಿರೋಧ ಮಾಡಬೇಕು.
ಅಂದರೆ ನಮ್ಮ ಮನಸ್ಸನ್ನು ತಡೆಹಿಡಿಯಬೇಕು. ಅದು ಎಲ್ಲಿಯೂ ಹರಿಯದಂತೆ ಒಡ್ಡುಹಾಕಿ ಅದು ಭಗವಂತನಲ್ಲೇ ನೆಲೆನಿಲ್ಲುವಂತೆ ಮಾಡಬೇಕು.
ನಮಗೆ
ಆತ್ಮಸಾಕ್ಷಾತ್ಕಾರವಾದಾಗ ಎಂದೂ ಆಗದ ಅಪೂರ್ವ ಆನಂದವಾಗುತ್ತದೆ. ಇದು ಅತ್ಯಂತ ಶ್ರೇಷ್ಠವಾದ ಆನಂದದ
ಅನುಭವ. ಭಗವಂತನ ಬಗ್ಗೆ ಭಕ್ತನ ಭಕ್ತಿ ಹಾಗು
ಭಕ್ತನ ಮೇಲೆ ಭಗವಂತನ ವಾತ್ಸಲ್ಯ ಇವೆರಡೂ ಮೇಳವಿಸಿದಾಗ
‘ನಿರ್ಭಯ’.
ಒಳಗಣ್ಣಿನಿಂದ
ಧ್ಯಾನದ ಸ್ಥಿತಿಯಲ್ಲಿ ಅಂತರ್ಯಾಮಿಯಾದ ಭಗವಂತನನ್ನು ಕಾಣುವುದು ಧ್ಯಾನದಲ್ಲಿ ಬರುವ ಅನುಭವ. ಇಲ್ಲಿ ನಮಗೆ ಕಾಣುವುದು ಮನಸ್ಸು ಕಡೆದ ಆ
ಭಗವಂತನ ಭವ್ಯ ರೂಪ. ಇದು ಕೇವಲ ಭಗವಂತನ ಪ್ರತೀಕ. ನಾವು ಭಗವಂತನನ್ನು ನಿಜವಾಗಿ ಕಾಣಬೇಕಾದರೆ
ಅವನು ನಮ್ಮನ್ನು ಪ್ರೀತಿಸಬೇಕು. ಭಗವದ್ ಅನುಗ್ರಹವಾದಾಗ ನಮ್ಮ ಸ್ವರೂಪ ಭಗವಂತನನ್ನು ಕಾಣುತ್ತದೆ.
ಇದು ಬಹಳ ಉತ್ಕಟವಾದ ಸ್ಥಿತಿ. ಈ ಸ್ಥಿತಿಯಲ್ಲಿ ಮನಸ್ಸು ಸಂಪೂರ್ಣ ಸ್ತಬ್ಧವಾಗಿ ನೇರವಾಗಿ
ಆತ್ಮಸ್ವರೂಪ ತನ್ನ ಆತ್ಮಸ್ವರೂಪದ ಕಣ್ಣಿನಿಂದ ಭಗವಂತನನ್ನು ಕಾಣುತ್ತದೆ. ಈ ಸ್ಥಿತಿ ಸಂಪೂರ್ಣ
ತೃಪ್ತಿಯನ್ನು ಕೊಡಬಲ್ಲದು. ಇಂದ್ರಿಯಗಳಿಂದ ಸಿಗುವ ಆನಂದ ಸಾಪೇಕ್ಷ ಎನ್ನುವ ನಿಜ ಆ ಹಂತದಲ್ಲಿ ತಿಳಿಯುತ್ತದೆ. ಈ ಉತ್ಕಟವಾದ
ಆನಂದವನ್ನು ಅನುಭವಿಸಿದ ಮೇಲೆ ಮತ್ತೆ ಮೇಲೇರಬೇಕು ಅಥವಾ ಕೆಳಗಿಳಿಯಬೇಕು ಎನ್ನುವ ಬಯಕೆ ಇಲ್ಲ.
ಭಗವಂತನ ಪೂರ್ಣ ಅನುಭವ ಬಂದಾತ ಯಾವ ಪ್ರಾಪಂಚಿಕ ದುಃಖದಲ್ಲೂ ಎಂದೂ ವಿಚಲಿತನಾಗುವುದಿಲ್ಲ. ಇದು ಮಾನವ ಜೀವನದಲ್ಲಿ
ಪಡೆಯಬಹುದಾದ ಅತೀ ಎತ್ತರದ ಸ್ಥಿತಿ. ನಾವು ನಿಜವಾದ ಆನಂದವನ್ನು ಕಾಣಬೇಕಾದರೆ ಈ ಉತ್ಕಟವಾದ
ಸ್ಥಿತಿಯನ್ನು ತಲುಪಬೇಕು.
ಮೇಲೆ ಹೇಳಿದ
ವಿಚಾರವನ್ನು ಕೇಳಿ ಕೆಲವರು ಭ್ರಮೆಗೊಳಗಾಗಿ ಒಮ್ಮೆಗೆ ಎಲ್ಲವನ್ನೂ ಬಿಟ್ಟು ಈ ಸ್ಥಿತಿಯನ್ನು
ತಲುಪುವ ಸಾಹಸಕ್ಕೆ ಕೈ ಹಾಕುತ್ತಾರೆ. ಆದರೆ ಹಾಗೆ ಮಾಡಿದರೆ ಎಂದೂ ಯಶಸ್ಸು ಸಿಗದು. ಕೇವಲ ನಿರಂತರ
ಸಾಧನೆಯಿಂದ ಮಾತ್ರ ಈ ಆನಂದವನ್ನು ಪಡೆಯಲು ಸಾಧ್ಯ. ಜೀವನದ ಸುಖವನ್ನು ಅನುಭವಿಸಿ, ಪ್ರಾಪಂಚಿಕ ಸುಖ ಸಾಕು ಎಂದು ಕಾಣಿಸಿದಾಗ ಅಧ್ಯಾತ್ಮದ ಆಳಕ್ಕಿಳಿಯುವ ಪ್ರಯತ್ನ ಮಾಡಬೇಕು.
ಇಲ್ಲದಿದ್ದರೆ ಅಪಾಯ.
No comments:
Post a Comment